ಕೋವಿಡ್-19ಗೆ ಪ್ರವೇಶ ನೀಡದ ಮೈಸೂರು ತಾಲ್ಲೂಕಿನ 14 ಹಳ್ಳಿಗಳು: ಇಗಲೂ ಶೂನ್ಯ ಪ್ರಕರಣಗಳು!

1 min read

ಮೈಸೂರು: ಗ್ರಾಮೀಣ ಭಾಗದಲ್ಲೇ ಹೆಚ್ಚು ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ನಡುವೆ ಮೈಸೂರು ತಾಲ್ಲೂಕಿನ 14 ಗ್ರಾಮಗಳಲ್ಲಿ ಕೋವಿಡ್ ಪ್ರಕರಣ ಶೂನ್ಯವಾಗಿದ್ದು, ಕೋವಿಡ್-19ಗೆ ಪ್ರವೇಶ ನೀಡದ ಹಳ್ಳಿಗಳು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮೈಸೂರು ತಾಲ್ಲೂಕು ವ್ಯಾಪ್ತಿಗೆ ಒಳಪಡುವ 37 ಗ್ರಾಮ ಪಂಚಾಯತಿಗಳಲ್ಲಿ 11 ಗ್ರಾಮ ಪಂಚಾಯತಿಗೆ ಸೇರುವ 14 ಗ್ರಾಮಗಳಲ್ಲಿ ಇದುವರೆಗೂ ಒಂದೂ ಕೋವಿಡ್ ಪ್ರಕರಣಗಳು ದಾಖಲಾಗದೆ ಕೊರೊನಾ ಮುಕ್ತವಾಗಿದ್ದು, ಇದು ಇತರೆ ಹಳ್ಳಿಗಳಿಗೆ ಮಾದರಿಯಾಗಿದೆ.

ತಾಲ್ಲೂಕಿನ ಮಾದಗಳ್ಳಿ, ರಾಯನಕೆರೆ, ಕಟ್ಟೆಹುಂಡಿ, ಕುಂಬ್ರಳ್ಳಿ, ಚಿಕ್ಕೇಗೌಡನಹುಂಡಿ, ಕೃಷ್ಣಪುರ, ರಾಮನಹಳ್ಳಿ, ಗುಡುಮಾದನಹಳ್ಳಿ, ಇನಮ್ ಉತ್ತನಹಳ್ಳಿ, ಲಕ್ಷ್ಮೀಪುರ, ಮಾಕನಹುಂಡಿ, ಹಂಚ್ಯಾಹುಂಡಿ, ಹೊಸಹುಂಡಿ, ಗುರುಕಾರಪುರ ಗ್ರಾಮಗಳು ಕೊರೊನಾ ಸೋಂಕಿಗೆ ಪ್ರವೇಶ ನೀಡದ ಗ್ರಾಮಗಳಾಗಿವೆ.

ಮಾರ್ಗಸೂಚಿಗೆ ಆದ್ಯತೆ ನೀಡಿದ ಗ್ರಾಮಸ್ಥರು:

ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯ ಜೊತೆಗೆ ಗ್ರಾಮಸ್ಥರೂ ಕೂಡ ಸ್ವಂ ಮಾರ್ಗಸೂಚಿಗಳನ್ನು ಕಟ್ಟನಿಟ್ಟಾಗಿ ಪಾಲಿಸಿದ ಫಲವಾಗಿ ಈ ಗ್ರಾಮಗಳು ಕೋವಿಡ್ ಸೋಂಕಿನಿಂದ ದೂರ ಉಳಿದವು.

ಇಲ್ಲಿನ ಜನರು ಸಾರ್ವಜನಿಕ ಸಮಾರಂಭಗಳಲ್ಲಿ ಭಾಗಿಯಾಗದೆ ಇರುವುದು, ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಹೋಗುವುದು, ವ್ಯಕ್ತಿಗಳಿಂದ ಅಂತರ ಕಾಪಾಡಿಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಅನೇಕ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ ಮಾಡಿದ ಪರಿಣಾಮದಿಂದಾಗಿ ಕೋವಿಡ್ ಈ ಗ್ರಾಮಗಳಿಗೆ ಕಾಲಿಡಲಿಲ್ಲ.

ಗ್ರಾಮ ಪಂಚಾಯತಿಗಳಿಂದ ಜಾಗೃತಿ:

ಗ್ರಾಮ ಪಂಚಾಯತಿ ವತಿಯಿಂದ ಕೋವಿಡ್ ಹರಡದಂತೆ ಮುಂಜಾಗ್ರತ ಕ್ರಮವಹಿಸಲು ಡಂಗೂರ ಸಾರುವ ಮೂಲಕ ಗ್ರಾಮಗಳಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಸ್ವತಃ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಿಡಿಒ ಮತ್ತು ಸಿಬ್ಬಂದಿ ಮನೆ ಮನೆ ಬಾಗಿಲಿ ಹೋಗಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಧರಿಸಿ ದೈಹಿಕ ಅಂತರ ಕಾಪಾಡುವುದು ಮತ್ತು ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡುತ್ತಿದ್ದಾರೆ. ಒಂದೆರಡು ಹಳ್ಳಿಗಳಲ್ಲಿ ಮಾತ್ರ ಲಕ್ಷಣ ಕಾಣಿಸಿಕೊಂಡ ಎರಡು ಮಂದಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

ಆಶಾ, ಅಂಗನವಾಡಿ ಕಾರ್ಯಕರ್ತೆಯರ ಅವಿರತ ಶ್ರಮ:

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಚುರುಕಾಗಿ ಕೆಲಸ ಮಾಡುತಿದ್ದಾರೆ. ಪ್ರತಿನಿತ್ಯ ಗ್ರಾಮದ ಮನೆ ಮನೆಗೆ ತೆರಳಿ ಪಲ್ಸ್ ಆಕ್ಸಿ ಮೀಟರ್, ಥರ್ಮಲ್ ಸ್ಕ್ರಿನಿಂಗ್‌ನಿಂದ ಆರೋಗ್ಯ ಸ್ಥಿರತೆ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಸೋಂಕಿನ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಜನರು ಮುಂಜಾಗ್ರತ ಕ್ರಮ ಅನುಸರಿಸುವುದರ ಜೊತೆಗೆ, ಗ್ರಾಮ ಪಂಚಾಯಿತಿಗಳ ಶ್ರಮದಿಂದ ಸೋಂಕು ಹರಡದಂತೆ ನೋಡಿಕೊಳ್ಳಲಾಗಿದೆ. ಇಲ್ಲಿವರೆಗೆ ಯಾರಿಗೂ ಸೋಂಕು ತಗುಲಿಲ್ಲ ಎಂಬುದು ಗಮನಾರ್ಹ ವಿಷಯವಾಗಿದೆ.

-ಎಂ.ಎಸ್.ರಮೇಶ್,

ಕಾರ್ಯನಿರ್ವಾಹಕ ಅಧಿಕಾರಿಗಳು ಮೈಸೂರು ತಾಲ್ಲೂಕು ಪಂಚಾಯತಿ.

About Author

Leave a Reply

Your email address will not be published. Required fields are marked *