ಕೋವಿಡ್ ನಿಯಂತ್ರಣ ಕುರಿತು ಜಿಲ್ಲೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡಿಸಿದ ಸಚಿವ ಎಸ್.ಟಿ.ಸೋಮಶೇಖರ್

1 min read

ಮೈಸೂರು,ಜ.26-ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ಹೆಚ್ಚಾಗಿದೆ. ಸೋಂಕಿತರ ಪ್ರಮಾಣ ಕಡಿಮೆಯಾಗುವವರೆಗೂ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು. ಯಾವ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವರು ಇಂದು ಜಿಲ್ಲೆಯ ಉನ್ನತಾಧಿಕಾರಿಗಳ ಸಭೆ ನಡೆಸಿದರು.
ಸೋಂಕಿತರು ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್‌ಗೆ ದಾಖಲಾಗುವ ಪರಿಸ್ಥಿತಿ ಕಡಿಮೆ ಇದೆ. ಹೋಂ ಐಸೋಲೇಷನ್ ಹೆಚ್ಚಿದೆ. ಹೋಂ ಐಸೋಲೇಷನ್‌ನಲ್ಲಿರುವ ಪೊಲೀಸರು, ಶಿಕ್ಷಕರು, ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರಿಗೂ ಕೋವಿಡ್ ಚಿಕಿತ್ಸಾ ಕಿಟ್‌ಗಳನ್ನು ಕಡ್ಡಾಯವಾಗಿ ತಲುಪಿಸಬೇಕು ಎಂದು ಸಚಿವರು ಸೂಚನೆ ನೀಡಿದರು.


ಕಳೆದ ಮೂರು ದಿನದಿಂದ ಸರಾಸರಿ 4 ಸಾವಿರ ಪ್ರಕರಣ ದಾಖಲಾಗಿವೆ. ಬ್ಯಾಕ್ ಲಾಕ್ ಆಗಿದ್ದರಿಂದ ಕೇಸ್ ಗಳ ಸಂಖ್ಯೆ ಹೆಚ್ಚಾಗಿದೆ. 7 ಸಾವಿರ ಕೇಸ್ ಬ್ಯಾಕ್ ಲಾಕ್ ಮುಗಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇನ್ನೂ 10 ದಿನದಲ್ಲಿ 1500 ರಿಂದ 2000 ಕೇಸ್ ಬರುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಕೇರ್ ಸೆಂಟರ್ ಸಿದ್ಧವಾಗಿದೆ. ನಿತ್ಯ 6 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಲಕ್ಷಣಗಳು ಇರುವವರಿಗೆ ಹಾಗೂ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇರುವವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮೈಸೂರಿನಲ್ಲಿ 18846 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 319 ಸೋಂಕಿತರು ಆಸ್ಪತ್ರೆಯಲ್ಲಿ, 224 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ, ಹೋಂ ಐಸೋಲೇಷನ್ ನಲ್ಲಿ 18308 ನಲ್ಲಿದ್ದಾರೆ. ಇವರೆಲ್ಲರ ಬಗ್ಗೆ ತೀವ್ರ ನಿಗಾವಹಿಸಬೇಕು ಎಂದು ಸಚಿವರು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಗಂಭೀರ ಸ್ಥಿತಿ ಇಲ್ಲ. ನಗರದಲ್ಲಿ ಪ್ರಕರಣಗಳು ಸ್ವಲ್ಪ ಹೆಚ್ಚಿದೆ. ಶಾಲೆಗಳಿಗೆ ರಜೆ ನೀಡುವ ಕುರಿತು ತಹಸೀಲ್ದಾರ್, ಡಿಡಿಪಿಐ, ಡಿಡಿಪಿಯು, ಡಿಎಚ್ ಒ ಅವರು ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಹೆಚ್.ಡಿ.ಕೋಟೆಯಲ್ಲಿ ಆಕ್ಸಿಜನ್ ಘಟಕ ಆರಂಭಿಸುವ ಕುರಿತು ಸಿಎಂ ಅವರೊಂದಿಗೆ ಚರ್ಚಿಸಲಾಗಿದೆ. ಶುಕ್ರವಾರ ಆಕ್ಸಿಜನ ಘಟಕ ಆರಂಭವಾಗಲಿದೆ. ಉಳಿದಂತೆ ಎಲ್ಲಾ ತಾಲೂಕುಗಳಲ್ಲಿ ಆಕ್ಸಿಜನ್ ಘಟಕಗಳು ಇವೆ.
ಸಭೆಯಲ್ಲಿ ಶಾಸಕರಾದ ಎಲ್‌.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ, ಅರಣ್ಯ ವಸತಿ ಮತ್ತು ವಿಹಾರಧಾಮ ಅಧ್ಯಕ್ಷರಾದ ಅಪ್ಪಣ್ಣ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷರಾದ ಎನ್.ವಿ.ಫಣೀಶ್, ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಎ.ಎಂ.ಯೋಗೀಶ್, ಮಹಾನಗರ ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *