ರಾಜ್ಯ ಸರ್ಕಾರದ ವಿರುದ್ಧ ಫೆ.7 ರಂದು ಮೈಸೂರು ಬಂದ್
1 min readಮೈಸೂರು,ಫೆ.3- ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಯವರು ಫೆ.7 ರಂದು ‘ಮೈಸೂರು ಬಂದ್’ ಗೆ ಮುಂದಾಗಿದ್ದಾರೆ.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿರುವ ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಬಂದ್ ಮಾಡಲು ಕರೆ ನೀಡಿದ್ದಾರೆ.
ಇಂದು ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿಯವರು ಈ ವಿಚಾರ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ರಾಯಚೂರಿನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಆದರೂ ರಾಜ್ಯ ಸರ್ಕಾರ ಇವರ ವಿರುದ್ಧ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ. ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಫೆ.7 ರಂದು ಮೈಸೂರು ಬಂದ್ ಮಾಡಲು ತೀರ್ಮಾನಿಸಿದ್ದು, ಮೈಸೂರಿಗರು ಬಂದ್ ಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಜೊತೆಗೆ ಅಂದು ನಡೆಯುವ ‘ಸಂವಿಧಾನ ಜಾಗೃತಿ ಅಭಿಯಾನ ಬೃಹತ್ ಡ್ಯಾಲಿ’ ಯಲ್ಲಿ ಪಾಲ್ಗೊಂಡು ಸಂವಿಧಾನ ರಕ್ಷಣೆಗೆ ಮುಂದಾಗುವಂತೆ ಕೋರಿದರು.