ಕೊರೊನಾ ವ್ಯಾಕ್ಸಿನ್ ಕೊರತೆ ತೀವ್ರವಾಗಿದ್ದು ಶೀಘ್ರವೇ ಸಮಸ್ಯೆ ಬಗೆಹರಿಸಿ: ಸಿದ್ದರಾಮಯ್ಯ

1 min read

ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಕೊರತೆ ತೀವ್ರವಾಗಿದ್ದು, ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೆಪಿಸಿಸಿ ವತಿಯಿಂದ ವ್ಯವಸ್ಥೆಗೊಳಿಸಿರುವ ಸಹಾಯವಾಣಿ ಹಾಗೂ ಆಂಬುಲೆನ್ಸ್ ಸೇವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ಪ್ರಶ್ನಿಸಿದರು.

18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು.

ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ, ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು.

ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು. ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು ಎಂದು ಅಭಿಪ್ರಾಯ ಪಟ್ಟರು.

ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು, ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು, ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ, ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಆಗ್ರಹಿಸಿದರು.

ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ ಎಂದರು.

ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ.

ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು ಎಂದು ಮನವಿ ಮಾಡಿದರು.

About Author

Leave a Reply

Your email address will not be published. Required fields are marked *